ಮೈಕ್ರೊ ಫೈನಾನ್ಸ್‌ ಕಂಪ‍ನಿಗಳ ಕಡಿವಾಣಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

ಮೈಕ್ರೊ ಫೈನಾನ್ಸ್‌ ಕಂಪ‍ನಿಗಳ ಕಡಿವಾಣಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

ಬಾಗೇಪಲ್ಲಿ: ಇತ್ತೀಚೆಗೆ ಹೆಚ್ಚಾಗಿರುವ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕೆ ಕಾನೂನು ಜಾರಿಗೊಳಿಸಬೇಕು. ಸಂಸ್ಥೆಗಳಿಂದ ಕಿರುಕುಳಕ್ಕೆ ಒಳಗಾಗುವ ಕುಟುಂಬಗಳಿಗೆ ರಕ್ಷಣೆ ಒದಗಿಸಬೇಕು. ಸರ್ಕಾರವೇ ಮಹಿಳಾ ಸ್ವ ಸಹಾಯ ಸಂಘ ಮತ್ತು ಸ್ತ್ರೀ ಶಕ್ತಿ ಸಂಘಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿದರದಲ್ಲಿ ಧೀರ್ಘಾವದಿಯ ಸಬ್ಸಿಡಿ ಸಹಿತ ಸಾಲ ನೀಡಬೇಕು ಎಂದು ಜನವಾದಿ ಮಹಿಳಾ ಸಂಚಾಲಕಿ ಸಾವಿತ್ರಮ್ಮ ಅಗ್ರಹಿಸಿದ್ದಾರೆ.

ಪಟ್ಟಣದ ತಾಲ್ಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯರು ಸಾಲ ಕೊಡುವ ಮೈಕ್ರೊಫೈನಾನ್ಸ್‌ ಸಂಸ್ಥೆಗಳು ಸಾಲ ವಸೂಲಿ ನೆಪದಲ್ಲಿ ಮಹಿಳೆಯರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಭಟನೆ ನಡೆಸಿ ತಹಶಿಲ್ದಾರ್ ಮನೀಷಾ ಎನ್ ಮಹೇಶ್ ಪತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ಮಹಿಳೆಯರಿಗೆ ಬಲವಂತವಾಗಿ ಸಾಲ ನೀಡಿ ಕಟ್ಟುವಂತೆ ಕಿರುಕುಳ ನೀಡುವ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಕನಿಷ್ಠ ಮಾಸಿಕ ಆದಾಯ ಇಲ್ಲದ ಕುಟುಂಬಗಳು ಮೈಕ್ರೊ ಫೈನಾನ್ಸ್ ಸಂಸ್ಥೆಗಳು ಒಳಗೊಂಡಂತೆ, ಇತರ ರಾಷ್ಟ್ರೀಕೃತ ಮತ್ತು ಸಹಕಾರ ಸಂಘಗಳಿಂದ ಪಡೆದಿರುವ ಸಾಲ ಮನ್ನಾಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಿಪಿಐಎಂ ಮುಖಂಡ ಚನ್ನರಾಯಪ್ಪ ಮಾತನಾಡಿ
ಸಂಸ್ಥೆಗಳ ವ್ಯವಹಾರದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ನಿಯಮ ರೂಪಿಸಬೇಕು. ಈಗಾಗಲೇ ವಸೂಲಿ ಮಾಡಿರುವ ಬಡ್ಡಿ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಿಂದಲೇ ಕಡಿಮೆ ಬಡ್ಡಿಗೆ ಸಾಲ ಪಡೆದು, ಅದನ್ನು ಬಡವರಿಗೆ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುವುದನ್ನು ತಡೆಯಬೇಕು ಎಂದರು.

ಸ್ವಯಂ ಉದ್ಯೋಗ ಮಾಡುವ ಮಹಿಳೆಯರಿಗೆ ಕನಿಷ್ಠ ₹5 ಲಕ್ಷದವರೆಗೆ ಬ್ಯಾಂಕ್‌ಗಳಲ್ಲಿ ಸಾಲ ನೀಡಲು ಸರಳ ನಿಯಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಕುರಿತು ತಹಶಿಲ್ದಾರ್ ಹೆಚ್ಚು ಗಮನ ಹರಿಸಬೇಕು. ಸಂಸ್ಥೆಗಳ ಸಂತ್ರಸ್ತರ ಜೊತೆ ಸಭೆ ನಡೆಸಿ, ಕಠಿಣ ನಿಯಮಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸೋಮಶೇಖರ್, ಲಕ್ಷ್ಮೀನರೆಡ್ಡಿ,ಮಹಿಳಾ ಸಂತ್ರಸ್ತರಾದ ಸಿ.ಉಮಾ,ಅನಿತಾ,ಸರಿತಾ,ಲಕ್ಷ್ಮೀ ನರಸಮ್ಮ,ಶಾಂತಮ್ಮ ಹಲವಾರು ಪ್ರತಿಭಟನಾಕಾರರು ಹಾಜರಿದ್ದರು.