ಸರಕಾರದ ಕ್ರಮ ಖಂಡಿಸಿ ಬೃಹತ್ ಪ್ರತಿಭಟನೆ
ಕಲಬುರ್ಗಿ: ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಹಿಂಪಡೆದ ರಾಜ್ಯದ ಕಾಂಗ್ರೆಸ್ ಸರ್ಕಾರದ ಕಾನೂನುಬಾಹಿರ ಕ್ರಮದ ವಿರುದ್ಧ ಇಂದು ಕಲಬುರ್ಗಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಾಲ್ಗೊಂಡು, ದುಷ್ಕರ್ಮಿಗಳ ವಿರುದ್ಧ ಪ್ರಕರಣ ಮರು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಆಗ್ರಹಿಸಿದರು.
ಪವಿತ್ರ ರಾಘವ ಚೈತನ್ಯ ಶ್ರೀ ಶಿವಲಿಂಗ ದೇವಸ್ಥಾನದ ಅಪಚಾರ ನಡೆಸಿದ ಗಲಭೆಕೋರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದಿರುವ ಈ ತುಘಲಕ್ ಕಾಂಗ್ರೆಸ್ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಕೇವಲ ತನ್ನ ಓಟ್ ಬ್ಯಾಂಕ್ ತುಷ್ಟೀಕರಣಕಾರಣಕ್ಕಾಗಿ ರಾಜ್ಯ ಸರ್ಕಾರವೇ ಸಮಾಜಘಾತುಕರ ಪರ ನಿಂತರೆ ಜನತೆಯ ಗತಿಯೇನು? ಎಂದು ಮುಖಂಡರು ಪ್ರಶ್ನಿಸಿದರು.
'ಹೇಳುವುದು ಆಚಾರ, ತಿನ್ನೋದು ಬದನೆಕಾಯಿ' ಎನ್ನುವಂತೆ ಈ ಕಾಂಗ್ರೆಸ್ ಸರ್ಕಾರ ಬಾಯಲ್ಲಿ ಹೇಳುವುದಕ್ಕೂ ಕಾರ್ಯತಃ ಮಾಡುವುದಕ್ಕೂ ಸಂಬಂಧವೇ ಇಲ್ಲ. ತಮ್ಮ ಮತ ಬ್ಯಾಂಕ್ ಸಂತೃಪ್ತಿಗಾಗಿ ಜನರ ಧಾರ್ಮಿಕ ನಂಬಿಕೆಗಳ ಮೇಲೆ ಆಕ್ರಮಣ ಮಾಡಿದವರಂನ್ನು, ಶ್ರದ್ಧಾಕೇಂದ್ರಗಳ ಮೇಲೆ ದಾಳಿ ಮಾಡಿದವರನ್ನು ರಕ್ಷಿಸುತ್ತಿರುವಷ್ಟು ನೈತಿಕವಾಗಿ ಕುಸಿದಿದೆ. ಒಂದು ಧರ್ಮದವರನ್ನು ಓಲೈಸಲು, ಇನ್ನೊಂದು ಧರ್ಮಕ್ಕೆ ಅವಮಾನ ಮಾಡಿದ ನೀಚರನ್ನೇ ರಕ್ಷಿಸುವಷ್ಟು ಬೌದ್ಧಿಕ ದಿವಾಳಿತನ ಪ್ರದರ್ಶಿಸಿದೆ. ಈ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕೀಯ, ರಾಜ್ಯದ ಕಾನೂನು ಸುವ್ಯವಸ್ಥೆಯ ಅಧಃಪಾತಕ್ಕೆ ಕನ್ನಡಿ ಹಿಡಿದಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಛೆತ್ತುಕೊಂಡು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೆ ಇದ್ದಲ್ಲಿ ಕಲಬುರ್ಗಿಯ ಪ್ರತಿಭಟನೆಯ ಕಿಚ್ಚು ರಾಜ್ಯಾದ್ಯಂತ ಹರಡಲಿದೆ ಎಂದು ಬಿಜೆಪಿ ಎಚ್ಚರಿಸಿದೆ.
ಬಹುಸಂಖ್ಯಾತರ ಭಾವನೆಗಳೊಂದಿಗೆ ಆಟವಾಡುತ್ತಿರುವ ಮತಿಗೆಟ್ಟ ಕಾಂಗ್ರೆಸ್ ಸರ್ಕಾರದ ಇಂತಹ ಜನವಿರೋಧಿ ಧೋರಣೆಗಳನ್ನು ನಮ್ಮ ಪಕ್ಷ ಎಂದಿಗೂ ಸಹಿಸುವುದಿಲ್ಲ. ನಮ್ಮ ಧರ್ಮ, ನಮ್ಮ ಸಂಸ್ಕೃತಿ ಮತ್ತು ಸಮಾಜದ ಶಾಂತಿಯನ್ನು ಕದಡುವ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಕಾಂಗ್ರೆಸ್ಸಿನ ಹಿಂದೂ ವಿರೋಧಿ ಧೋರಣೆಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಲಾಯಿತು.
ಪಕ್ಷದ ಕಲಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಬೀದರ್ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಬಸವರಾಜ ಮತ್ತಿಮೂಡ್, ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಂಸದ ಡಾ. ಉಮೇಶ್ ಜಾಧವ್, ಮಾಜಿ ಶಾಸಕರಾದ ಸುಭಾ ಗುತ್ತೇದಾರ್, ಅಪ್ಪುಗೌಡ, ನರಸಿಂಹ ನಾಯಕ್ (ರಾಜು ಗೌಡ) ಸೇರಿದಂತೆ ಹಲವಾರು ನಾಯಕರು, ಜನಪ್ರತಿನಿಧಿಗಳು, ಪ್ರಮುಖರು, ಮುಖಂಡರು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
What's Your Reaction?