ಕೃಷಿಕರೆಂದು ಪರಿಗಣಿಸಿ ನೇಕಾರರ ಅಭಿವೃದ್ಧಿ
ಉಡುಪಿ: ರಾಜ್ಯದಲ್ಲಿ ನೇಕಾರರನ್ನು ಕೃಷಿಕರೆಂದು ಪರಿಗಣಿಸಿ ಅವರ ಅಭಿವೃದ್ಧಿಗೆ ವಿವಿಧ ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ. ಪಾಟೀಲ ಮುನೇನಕೊಪ್ಪ ಹೇಳಿದರು.
ಶುಕ್ರವಾರ ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದುಕೊರತೆ ಆಲಿಸಿ ಮಾತನಾಡಿದರು.
ನೆೇಕಾರ ಸಮ್ಮಾನ ಯೋಜನೆಯಡಿ ಈಗಾಗಲೇ ಮೊತ್ತ ಪಾವತಿಸಲಾಗಿದ್ದು, 122 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ, ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಬಡ್ಡಿ ಸಹಾಯಧನ ಯೋಜನೆ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪರಿಣಿತರ ತಂಡ
ಅವಿಭಜಿತ ದ.ಕ. ಜಿಲ್ಲ್ಲೆಯ ಕೈಮಗ್ಗಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಜವಳಿ ಇಂಜಿನಿಯರ್ ಗಳು ಮತ್ತು ಜವಳಿ ಪರಿಣಿತರ ತಂಡವನ್ನು ಜಿಲ್ಲೆಗೆ ಕಳಿಸಿ ಅವರಿಂದ ಪರಿಶೀಲನಾ ವರದಿ ಪಡೆದು, ಕೈಮಗ್ಗಗಳನ್ನು ತಾಂತ್ರಿಕವಾಗಿ ಸುಧಾರಿಸಿ, ನೇಕಾರರಿಗೆ ಆರ್ಥಿಕ ಅನುಕೂಲ ಮಾಡಿಕೊಡಲಾಗುವುದು.
ನೇಕಾರಿಕೆಯಲ್ಲಿ ನಷ್ಟ ಎಂಬ ಕಾರಣದಿಂದ ಯುವಜನತೆ ಈ ಉದ್ಯೋಗದಿಂದ ದೂರ ಉಳಿದಿದ್ದಾರೆ. ನೇಕಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸುವ ಮೂಲಕ ಅದನ್ನು ಲಾಭದಾಯಕವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಕಾರ್ಕಳದಲ್ಲಿ ಆರಂಭವಾಗಲಿರುವ ಜವಳಿ ಪಾರ್ಕ್ ನಲ್ಲಿ ವೃತ್ತಿಪರ ನೇಕಾರರಿಗೆ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ತರಬೇತಿ ಕೇಂದ್ರ ತೆರೆಯಲಾಗುವುದು. ವಿದ್ಯಾರ್ಥಿಗಳಿಗೂ ಈ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು ಎಂದರು.
ಉಡುಪಿ ಕೈಮಗ್ಗದ ಸೀರೆಗಳಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಬೇಡಿಕೆ ಇದೆ ಎಂದು ಸಚಿವರು ತಿಳಿಸಿದರು.
ಮಾರುಕಟ್ಟೆ ಒದಗಿಸಿ
ಶಾಸಕ ರಘುಪತಿ ಭಟ್ ಮಾತನಾಡಿ, ಕೈಮಗ್ಗಗಳನ್ನು ಪುನಃಶ್ಚೇತನಗೊಳಿಸಬೇಕು. ಆಧುನಿಕ ತಂತ್ರಜ್ಞಾನ ಅಳವಡಿಸುವ ಮೂಲಕ ಯುವಜನತೆ ಇದರೆಡೆಗೆ ಆಕರ್ಷಿತವಾಗುವಂತೆ ಹಾಗೂ ಲಾಭದಾಯಕವಾಗುವಂತೆ ಮಾಡಬೇಕು. ಕೈಮಗ್ಗ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕು ಎಂದರು.
ಕೈಮಗ್ಗ ಉತ್ಪನ್ನಗಳಿಗೆ ವಿಧಿಸಲಾಗಿರುವ ಜಿ.ಎಸ್.ಟಿ ದರವನ್ನು 12 ಶೇ.ದಿಂದ 5 ಶೇ.ಕ್ಕಿಳಿಸಬೇಕು. ನೇಕಾರರಿಗೆ ನೀಡುವ ಮಜೂರಿ ಮೇಲೆ 10 ಶೇ. ಇನ್ಸೆಂಟಿವ್ ಹಾಗೂ ಪ್ರೋತ್ಸಾಹ ಧನ ನೀಡಬೇಕು ಎಂದು ನೇಕಾರರು ಸಚಿವರಲ್ಲಿ ಮನವಿ ಮಾಡಿದರು.
ಕೈಮಗ್ಗ ಮತ್ತು ಜವಳಿ ಇಲಾಖೆ ಹೆಚ್ಚುವರಿ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ಅಶೋಕ್, ದ.ಕ. ಜಿಲ್ಲಾ ಸಹಾಯಕ ನಿರ್ದೇಶಕ ಶಿವಶಂಕರ್, ನೇಕಾರರ ಸಂಘದ ಅಧ್ಯಕ್ಷ ಅಬ್ನೆಸರ್ ಸತ್ಯಾರ್ಥಿ, ಶಿವಳ್ಳಿ ನೇಕಾರರ ಸಂಘದ ಶಶಿಕಾಂತ್ ಮೊದಲಾದವರಿದ್ದರು.
ಉಡುಪಿ ನೇಕಾರರ ಸಂಘದ ವ್ಯವಸ್ಥಾಪಕ ನಿರ್ದೇಶಕ ಸದಾನಂದ ಕಾಂಚನ್ ಸ್ವಾಗತಿಸಿ, ವಂದಿಸಿದರು