ರಾಜ್ಯದಲ್ಲಿ ಎಥೆನಾಲ್ ಪಾಲಿಸಿ ಜಾರಿಗೆ ನಿರ್ಧಾರ
ಉಡುಪಿ: ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಕುರಿತಂತೆ ಎಥೆನಾಲ್ ಪಾಲಿಸಿ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ. ಪಾಟೀಲ ಮುನೇನಕೊಪ್ಪ ಹೇಳಿದರು.
ಶುಕ್ರವಾರ ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ರೈತರು ಬೆಳೆಯುವ ಕಬ್ಬು, ಭತ್ತ ಮತ್ತು ಗೋವಿನ ಜೋಳದಿಂದ ಎಥೆನಾಲ್ ಉತ್ಪಾದಿಸಲು ಸಾಧ್ಯವಿದ್ದು, ದೇಶದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಉತ್ಪಾದಿಸುತ್ತಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ರಾಜ್ಯದ ಸಂಶೋಧಕರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ತಾನು ಕೂಡಾ ಕೇಂದ್ರ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದ ಸಚಿವರು, ರಾಜ್ಯದಲ್ಲಿ ಎಥೆನಾಲ್ ಉತ್ಪಾದಕರಿಗೆ ಸಬ್ಸಿಡಿ ಹಾಗೂ ಪ್ರೋತ್ಸಾಹ ನೀಡಲಾಗುವುದು. ಅದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿ, ರೈತರಿಗೆ ಲಾಭ ಆಗಲಿದೆ. ಸಕ್ಕರೆ ಉದ್ದಿಮೆಗಳ ಪುನಃಶ್ಚೇತನವೂ ಸಾಧ್ಯವಾಗಲಿದೆ ಎಂದರು.
ರಾಜ್ಯದಲ್ಲಿ ಉತ್ಪಾದಿಸಲಾಗುವ ಎಥೆನಾಲನ್ನು ಸರ್ಕಾರವೇ ಖರೀದಿಸಿ, ಅದನ್ನು ಪೆಟ್ರೋಲಿಯಂ ಕಂಪೆನಿಗಳಿಗೆ ಮಾರಾಟ ಮಾಡಲಿದೆ. ರಾಜ್ಯದಲ್ಲಿ ಎಥೆನಾಲ್ ಉತ್ಪಾದಿಸಲು ಅನುಮತಿ ಕೋರುವ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದಿಂದ ಅನುಮತಿ ನೀಡಲಾಗುವುದು. ಸಕ್ಕರೆ ಕಾರ್ಖಾನೆಗಳು ಸಕ್ಕರೆಯೊಂದಿಗೆ ಇತರ ಉಪ ಉತ್ಪನ್ನಗಳನ್ನು ತಯಾರಿಸುವ ಮೂಲಕ ಆರ್ಥಿಕವಾಗಿ ಲಾಭ ಹೊಂದಲು ಸಾಧ್ಯ ಎಂದು ಸಚಿವ ಶಂಕರ ಬ. ಪಾಟೀಲ ಹೇಳಿದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ, ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿ, ಕಾರ್ಖಾನೆ ಆರಂಭಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಹೆಚ್ಚುವರಿ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ಅಶೋಕ್, ದ.ಕ. ಜಿಲ್ಲಾ ಸಹಾಯಕ ನಿರ್ದೇಶಕ ಶಿವಶಂಕರ್ ಮೊದಲಾದವರಿದ್ದರು.
ಕೈಮಗ್ಗಕ್ಕೆ ಭೇಟಿ
ಬಳಿಕ ಸಚಿವ ಶಂಕರ ಬ. ಪಾಟೀಲ ಮುನೇನಕೊಪ್ಪ ಅವರು ದೊಡ್ಡಣಗುಡ್ಡೆ ನೇಕಾರರ ಕಾಲೋನಿಯ ಸೀತಾರಾಮ ಶೆಟ್ಟಿಗಾರ ಅವರ ಕೈಮಗ್ಗಕ್ಕೆ ಭೇಟಿ ನೀಡಿ, ಕೈಮಗ್ಗದ ಕಾರ್ಯ ವಿಧಾನ ವೀಕ್ಷಿಸಿದರು