ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26
ಸಾರ್ವಜನಿಕ ಶಾಂತಿಭಂಗ: ಗಡಿಪಾರು ಆದೇಶ
ಕುಂದಾಪುರ: ಹಲವಾರು ಕ್ರಿಮಿನಲ್ ಪ್ರಕರಣಗಳ ಆರೋಪಿ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಕಾಂಡ್ಲಗದ್ದೆ ನಿವಾಸಿ ಅಬ್ದುಲ್ ಬ್ಯಾರಿ ಎಂಬವರ ಮಗ ಅಬೂಬಕ್ಕರ್ (43) ಎಂಬಾತನಿಗೆ ಗಡಿಪಾರು ಶಿಕ್ಷೆ ವಿಧಿಸಿ ಕುಂದಾಪುರ ಸಹಾಯಕ ಕಮೀಷನರ್ ಆದೇಶಿಸಿದ್ದಾರೆ.
ಆತ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಜೊತೆಗೆ ತನ್ನದೇ ಆದ ತಂಡವೊಂದನ್ನು ಕಟ್ಟಿಕೊಂಡು ಕಳ್ಳತನ, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆತನ ವಿರುದ್ದ 9 ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕವೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿದ್ದ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಂದಾಪುರ ಸಹಾಯಕ ಕಮೀಷನರ್ ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದರು.
ಅದರಂತೆ ಕುಂದಾಪುರ ಉಪ ವಿಭಾಗ ದಂಡಾಧಿಕಾರಿ ಅಬೂಬಕರ್ ಗೆ ಜು. 26ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ, ಜಮಖಂಡಿ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.
ಮುಂದಿನ 6 ತಿಂಗಳೊಳಗೆ ಸಂಬಂಧಪಟ್ಟ ಪ್ರಾಧಿಕಾರದ ಅನುಮತಿ ಪಡೆಯದೆ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಎಲ್ಲಿಯಾದರೂ ಯಾವುದೇ ಕಾರಣಕ್ಕೆ ಕಂಡುಬಂದಲ್ಲಿ ದಸ್ತಗಿರಿ ಮಾಡುವಂತೆ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರಿಗೆ ಆದೇಶ ನೀಡಿದ್ದಾರೆ.