ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದರು.
ವೀಡಿಯೊ ಸಂವಾದದ ಮೂಲಕ ಮಾತನಾಡಿದ ಅವರು, ಮಕ್ಕಳಿಗೆ ಕೋವಿಡ್ 3ನೇ ಅಲೆಯಿಂದ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳ ವಿವರ ಸಂಗ್ರಹಿಸಿ, ಅವರು ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿಯೇ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಿ. ತಪಾಸಣೆ ಸಂದರ್ಭದಲ್ಲಿ ಒಬ್ಬರು ಎಂ.ಬಿ.ಬಿಎಸ್ ವೈದ್ಯರು, ಆಯುಷ್ ವೈದ್ಯರು ಮತ್ತು ಮಕ್ಕಳ ತಜ್ಞರನ್ನು ತಂಡವಾಗಿ ನಿಯೋಜಿಸಿ. ಪ್ರತೀ ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಲು ಯೋಜನೆ ರೂಪಿಸಿ ಎಂದರು.
ಮಕ್ಕಳ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಕ್ಕಳಲ್ಲಿನ ಅಪೌಷ್ಠಿಕತೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯವಿರುವ ಮಕ್ಕಳಿಗೆ ಸ್ಥಳದಲ್ಲಿ ಉಚಿತವಾಗಿ ಅಗತ್ಯ ಔಷಧ ನೀಡಲು ಕ್ರಮ ಕೈಗೊಳ್ಳಿ. ಈ ಕಾರ್ಯಕ್ರಮ ಆಯೋಜನೆ ಕುರಿತಂತೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಕ್ಕಳ ಪೋಷಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿ. ಮಕ್ಕಳು ಪೋಷಕರೊಂದಿಗೆ ಆರೋಗ್ಯ ತಪಾಸಣೆಗೆ ಬರುವಂತೆ ಕ್ರಮ ಕೈಗೊಳ್ಳಿ. ತಪಾಸಣೆ ಸಂದರ್ಭದಲ್ಲಿ ವ್ಯಕ್ತಿಗತ ಅಂತರ ಸೇರಿದಂತೆ ಎಲ್ಲಾ ಅಗತ್ಯ ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಚಿವ ಬೊಮ್ಮಾಯಿ ಸೂಚಿಸಿದರು.
ಜಿಲ್ಲೆಯ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಜುಲೈ ಅಂತ್ಯದೊಳಗೆ ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಈ ಕಾರ್ಯಕ್ಕೆ ಅಗತ್ಯವಿರುವ ವೈದ್ಯರು ಮತ್ತು ಸಹಾಯಕ ಸಿಬ್ಬಂದಿ, ಪ್ರತಿದಿನ ಬೇಟಿ ನೀಡಬಹುದಾದ ಗ್ರಾಮಗಳ ವಿವರ ಸೇರಿದಂತೆ ಕಾರ್ಯಕ್ರಮದ ಅನುಷ್ಠಾನಕ್ಕೆ ಅಗತ್ಯವಿರುವ ಸಮಗ್ರ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಸುನಿಲ್ ಕುಮಾರ್ ಮತ್ತು ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ. ಪಂ. ಸಿಇಓ ಡಾ. ನವೀನ್ ಭಟ್, ಎಸ್.ಪಿ. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಸರ್ಜನ್ ಮಧುಸೂದನ ನಾಯಕ್, ಡಿಎಚ್.ಓ ಡಾ. ನಾಗಭೂಷಣ ಉಡುಪ ಮೊದಲಾದವರಿದ್ದರು.