ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಮನವಿ ಮೇರೆಗೆ ಬೆಂಗಳೂರು- ಕಾರವಾರ ರೈಲನ್ನು ಪಂಚಗಂಗಾ ಎಕ್ಸ್ ಪ್ರೆಸ್ ಎಂದು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಕರಾವಳಿಯ ಜೀವನಾಡಿಯಾದ ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲಿಗೆ ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿ ಹೆಸರಿನಿಂದ ಆಯ್ದ ಪಂಚಗಂಗಾ ಎಕ್ಸ್ ಪ್ರೆಸ್’ ಎಂದು ಹೆಸರಿಸಲಾಗಿದೆ.
ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿಯಾಗಿ ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಜಿಲ್ಲೆಯ ತೀರ್ಥಕ್ಷೇತ್ರ, ಪ್ರವಾಸೋದ್ಯಮ, ಮೀನುಗಾರಿಕೆ, ಕೃಷಿ ಹಾಗು ಜನಜೀವನಕ್ಕೆ ಆಧಾರವಾಗಿದ್ದು, ಈ ಕಾರಣದಿಂದ ಬೆಂಗಳೂರು- ಕಾರವಾರ ರೈಲಿಗೆ ಪಂಚಗಂಗಾ ಹೆಸರಿಡಬೇಕು ಎಂದು ಕೇಳಿಕೊಳ್ಳಲಾಗಿತ್ತು.
ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿ ಬಿಂಬಿಸುವ ಪಂಚಗಂಗಾ ಎಕ್ಸ್ ಪ್ರೆಸ್ ಎಂದು ರೈಲಿಗೆ ನಾಮಕರಣ ಮಾಡಿದ ಕೇಂದ್ರ ಸರ್ಕಾರ ಹಾಗು ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅಭಿನಂದನೆ ಸಲ್ಲಿಸಿದ್ದಾರೆ.