ಉಡುಪಿ: ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ, ಕಾಮಗಾರಿ ಅನುಷ್ಠಾನ ಕುರಿತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಬೇಕು. ಅದರಿಂದ ಯೋಜನೆಯ ಸಂಪೂರ್ಣ ಪ್ರಯೋಜನ ದೊರೆಯಲಿದೆ ಎಂದು ಜಿ. ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು.
ಗುರುವಾರ ಜಿ. ಪಂ. ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮಗಳಲ್ಲಿ ಸ್ಥಳೀಯ ಜಲಮೂಲ ಗುರುತಿಸಲು ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳ ನೆರವು ಅಗತ್ಯವಿದೆ. ಯಾವ ಕಾಮಗಾರಿಗಳು ತುರ್ತು ಅಗತ್ಯ ಎಂಬುದನ್ನು ಆದ್ಯತೆಯಲ್ಲಿ ಕೈಗೆತ್ತಿಕೊಳ್ಳಬೇಕು. ಸ್ಥಳೀಯರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ, ಪಾರದರ್ಶಕವಾಗಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾನದಂಡ ಆದಾಯ ಮಿತಿಯನ್ನು ವಸತಿ ನಿಗಮ 32 ಸಾವಿರ ರೂ.ಗೆ ನಿಗದಿಪಡಿಸಿದ್ದು, ಬಿಪಿಎಲ್ ಕಾರ್ಸ್ ಆದಾಯ ಮಿತಿ 1.20 ಲಕ್ಷ ಇದೆ. ಅದರಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಲಸಿಕೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿ 22,230 ಮಂದಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲು ಗುರಿ ಹೊಂದಿದ್ದು, ಇದುವರೆಗೆ 60 ಶೇ. ಸಾಧನೆ ಸಾಧಿಸಲಾಗಿದೆ. ಮುಂದಿನ 5 ದಿನದಲ್ಲಿ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಡಿ.ಎಚ್.ಒ ಡಾ. ಸುಧೀರಚಂದ್ರ ಸೂಡ ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾ. ಪಂ.ಗಳಲ್ಲಿ ಮನೆಗಳಿಂದ ಹಸಿ ಕಸ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ವಾರದಲ್ಲಿ ಒಂದು ದಿನ ಒಣ ಕಸ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿ. ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.
ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಜಿ. ಪಂ. ಸಿಇಓ ಡಾ. ನವೀನ ಭಟ್, ಉಪ ಕಾರ್ಯದಶರ್ಿ ಕಿರಣ್ ಫಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು